ಭಾರತ-ಸಾವಿತ್ರೀ (ಭಾಗ 4)
ಒರೆಗಲ್ಲು
ಇಷ್ಟೆಲ್ಲ ಹಿನ್ನೆಲೆ ನಮಗೆ ಲಭ್ಯವಿದ್ದರೂ, ಒಂದು ವಿಶಿಷ್ಟ ಸನ್ನಿವೇಶದಲ್ಲಿ ಯಾವುದು ಧರ್ಮ ಯಾವುದು ಅಧರ್ಮ ಎಂಬ ನಿರ್ಣಯ ಸರಳವಲ್ಲ. ದ್ರೌಪದೀ ಶೀಲಹರಣದ ಸಂದರ್ಭದಲ್ಲಿ ದ್ರೌಪದಿಯು ಆಚಾರ್ಯ ಭೀಷ್ಮರನ್ನು ಮೊನಚಾಗಿ ಪ್ರಶ್ನಿಸಿದಾಗ ಭೀಷ್ಮರೇ ಅದನ್ನು ತಾವು ತೀರ್ಮಾನಿಸಲು ಅಶಕ್ತರಾಗಿದ್ದೇವೆ (‘ನ ಶಕ್ನೋಮಿ ತೇ ಪ್ರಶ್ನಂ ಇಮಾಂ ಯಥಾವತ್’ – 2.60.40) ಎಂದು ಬಹಿರಂಗವಾಗಿ ಹೇಳಬೇಕಾಯಿತು.
ಪುರುಷಾರ್ಥಗಳ ಶ್ರೇಣೀಕರಣ ಮೊದಲಾದ ವಿಸ್ತೃತ ಹಿನ್ನೆಲೆಯಲ್ಲಿ, ಎಂದರೆ ಆ ವಿಶಿಷ್ಟ ಸಂದರ್ಭದಿಂದ ಅತೀತವಾದ ನೆಲೆಯಲ್ಲಿ ಮಾತ್ರ ಶಂಕೆಯು ಪರಿಹಾರವಾಗಬಲ್ಲದು.
ಇದು ಸ್ವಲ್ಪ ವಿವರಣೆಯನ್ನು ಅಪೇಕ್ಷಿಸುತ್ತದೆ.
