ಭಾರತ-ಸಾವಿತ್ರೀ (ಭಾಗ 2)
ಪುರುಷಾರ್ಥಜಿಜ್ಞಾಸೆ
ಇಲ್ಲಿಯ ಸಂದೇಶದ ಅಂಶಗಳು ಗ್ರಂಥದುದ್ದಕ್ಕೂ ಅಲ್ಲಲ್ಲಿ ಬಂದಿರುವಂತಹವೇ ಆಗಿವೆ. ಮುಖ್ಯವಾದ ಸಂದೇಶ – ಜಗತ್ತಿನಲ್ಲಿ ಪ್ರಾಥಮ್ಯಕ್ಕೆ ಅರ್ಹವಾದ ತತ್ತ್ವವೆಂದರೆ ಧರ್ಮವು ಮಾತ್ರವೆಂಬುದು; ಧರ್ಮವು ಮಾತ್ರ ಅಂತಿಮವಾಗಿ ಜಗತ್ತಿನ ಸಂಸ್ಥಿತಿಗೂ ಸಂಕ್ಷೇಮಕ್ಕೂ ಕಾರಣವಾಗಬಲ್ಲದು – ಎಂಬುದು. ಸಾಮಾನ್ಯವಾಗಿ ವ್ಯಾವಹಾರಿಕ ಜೀವನದ ಸ್ತರದಲ್ಲಿ ಜನರ ಹೆಚ್ಚಿನ ಲಕ್ಷ್ಯವನ್ನು ಸೆಳೆಯುವವು ಅರ್ಥ ಮತ್ತು ಕಾಮಗಳೇ ಆದರೂ, ಭೌತಸಮೃದ್ಧಿ ಮತ್ತು ಕಾಮಪೂರಣಗಳೆಂಬ ಪುರುಷಾರ್ಥಗಳನ್ನೂ ಧರ್ಮವೇ ಸಾಧಿಸಿಕೊಡಬಲ್ಲದು – ಎಂದು ವ್ಯಾಸರು ಹೇಳಿರುವುದನ್ನು ಗಮನಿಸಬೇಕು.
